ನೀನು ಮುಗಿಲು, ನಾನು ನೆಲ.
ನಿನ್ನ ಒಲವೆ ನನ್ನ ಬಲ.
ನಮ್ಮಿಬ್ಬರ ಮಿಲನದಿಂದ ಉಲ್ಲಾಸವೇ ಶ್ಯಾಮಲಾ.
ನಾನು ಎಳೆವೆ, ನೀನು ಮಣಿವೆ,
ನಾನು ಕರೆವೆ, ನೀನು ಸುರಿವೆ.
ನಮ್ಮಿಬ್ಬರ ಒಲುಮೆ ನಲುಮೆ ಜಗಕಾಯಿತು ಹುಣ್ಣಿಮೆ.
ನಾನಚಲದ ತುಟಿಯೆತ್ತುವೆ,
ನೀ ಮಳೆಯೊಲು ಮುತ್ತನಿಡುವೆ.
ನಿನ್ನಿಂದಲೇ ತೆರೆವುದೆನ್ನ ಚೈತನ್ಯದ ಕಣ್ಣೆವೆ.
ಸೂರ್ಯ ಚಂದ್ರ ಚಿಕ್ಕೆಗಣ್ಣ,
ತೆರೆದು ನೀನು ಸುರಿವ ಬಣ್ಣ.
ಹಸಿರಾಯಿತು ಹೂವಾಯಿತು ಚೆಲುವಾಯಿತು ಈ ನೆಲ.
ನೀನು ಗಂಡು, ನಾನು ಹೆಣ್ಣು,
ನೀನು ರೆಪ್ಪೆ, ನಾನು ಕಣ್ಣು.
ನಮ್ಮಿಬ್ಬರ ಮಿಲನದಿಂದ ಸುಫಲವಾಯ್ತು ಜೀವನ.
ಸಾಹಿತ್ಯ – ಜಿ. ಎಸ್. ಶಿವರುದ್ರಪ್ಪ
ಸಂಗೀತ – ?
ಗಾಯನ – ರತ್ನಮಾಲ ಪ್ರಕಾಶ್
ಕಾಣದ ಕಡಲಿಗೆ ಹಂಬಲಿಸಿದೆ ಮನ….
ಕಾಣಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ
ಕಾಣದ ಕಡಲಿನ ಮೊರೆತದ ಜೋಗುಳ
ಒಳಗಿವಿಗಿಂದು ಕೇಳುತಿದೆ
ನನ್ನ ಕಲ್ಪನೆಯು ತನ್ನ ಕಡಲನೆ
ಚಿತ್ರಿಸಿ ಚಿಂತಿಸಿ ಸುಯ್ಯುತಿದೆ
ಎಲ್ಲಿರುವುದೋ ಅದು, ಎಂತಿರುವುದೋ ಅದು
ನೋಡಬಲ್ಲೆನೇ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ
ಸಾವಿರ ಹೊಳೆಗಳು ತುಂಬಿ ಹರಿದರೂ
ಒಂದೇ ಸಮನಾಗಿಹುದಂತೆ
ಸುನೀಲ, ವಿಸ್ತರ, ತರಂಗಶೋಭಿತ
ಗಂಭೀರಾಂಬುಧಿ ತಾನಂತೆ
ಮುನ್ನೀರಂತೆ, ಅಪಾರವಂತೆ
ಕಾಣಬಲ್ಲೆನೆ ಒಂದು ದಿನ
ಅದರೊಳು ಕರಗಲಾರೆನೆ ಒಂದು ದಿನ
ಜಟಿಲ ಕಾನನದ ಕುಟಿಲ ಪಥಗಳಲಿ
ಹರಿವ ತೊರೆಯು ನಾನು
ಎಂದಿಗಾದರು ಕಾಣದ ಕಡಲನು
ಸೇರಬಲ್ಲೆನೇನು
ಸೇರಬಹುದೇ ನಾನು
ಕಡಲ ನೀಲಿಯೊಳು ಕರಗಬಹುದೇ ನಾನು
ಸಾಹಿತ್ಯ – ಜಿ. ಎಸ್. ಶಿವರುದ್ರಪ್ಪ
ಸಂಗೀತ / ಗಾಯನ – ಸಿ ಅಶ್ವಥ್
ಯಾವ ಒ೦ದು ಗ್ರ೦ಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರ೦ಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು
You must be logged in to post a comment.